ಮಂಗಳೂರು : ಯುವ ಸಮುದಾಯ ತಂಬಾಕು ಉತ್ಪನ್ನಗಳಿಂದ ದೂರವಿರುವುದು ಮಾತ್ರವಲ್ಲ, ತಂಬಾಕು ದುಷ್ಪರಿಣಾಮದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು.
ತಂಬಾಕಿನ ವಿರುದ್ಧ ವಿದ್ಯಾರ್ಥಿಗಳು ಕೈಗೊಳ್ಳುವ ಜಾಗೃತಿ ಮಹತ್ವದ ಬದಲಾವಣೆ ತರಬಲ್ಲದು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ನಾಂದಿಯಾಗಬಹುದು ಎಂದು
ಎಂದು ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಅಂತೋನಿ ಮಸ್ಕರೇನ್ಹಸ್ ಹೇಳಿದರು.
ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಪ.ಪೂ.ಕಾಲೇಜು ಹಂಪನಕಟ್ಟೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶನಿವಾರ ನಗರದ ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ವಿದ್ಯಾರ್ಥಿಗಳು ತಂಬಾಕು ಸೇವನೆ, ಧೂಮಪಾನದಂತಹ ದುಶ್ಚಟಗಳಿಂದ
ದೂರವಿರಲು ದೃಢ ನಿರ್ಧಾರ ಕೈಗೊಂಡರೆ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದರು..
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಲೋಚಕ ಪುಂಡಲೀಕ ಲಕಾಟೆ ಮತ್ತು ವೆನ್ಲಾಕ್ ಆಸ್ಪತ್ರೆಯ ತಂಬಾಕು ನಿಯಂತ್ರಣ ಕೇಂದ್ರದ ಸಮಾಲೋಚಕ ವಿಜಯಕುಮಾರ್
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು, ರೆಡ್ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಕಿಶೋರ್ಚಂದ್ರ ಹೆಗ್ಡೆ, ಕಾಲೇಜಿನ ಹಿರಿಯ ಉಪನ್ಯಾಸಕಿ ಶ್ಯಾಮಲಾ ಉಪಸ್ಥಿತರಿದ್ದರು. ಯೂತ್ ರೆಡ್ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ.ಬಿ. ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕಿ ಮಲ್ಲಿಕಾ ವಂದಿಸಿದರು. ಉಪನ್ಯಾಸಕ ರಮೇಶ್.ಎಂ. ಕಾರ್ಯಕ್ರಮ ನಿರೂಪಿಸಿದರು.


