ಮಂಗಳೂರು: ಕರಾವಳಿ ಕರ್ನಾಟಕದ ಶೈಕ್ಷಣಿಕ ಪ್ರಗತಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಗಣನೀಯ ಕೊಡುಗೆ ನೀಡಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಪ್ರೊ. ಕೆ. ಚಿನ್ನಪ್ಪಗೌಡ ಹೇಳಿದ್ದಾರೆ.
ಅವರು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ 46 ನೇ ಸಂಸ್ಥಾಪನಾ ದಿನಾಚರಣೆ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಿಂದ ವಂಚಿತರಾಗಿದ್ದ ಜಿಲ್ಲೆಯ ಹಲವಾರು ಸಮುದಾಯಗಳು ವಿಶೇಷವಾಗಿ ಕೆಳಸ್ತರದ ವರ್ಗಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸ್ಥಾಪನೆಯಿಂದ ಉನ್ನತ ಶಿಕ್ಷಣವು ಕೈಗೆಟುಕುವಂತಾಯಿತು. ಅದರಲ್ಲೂ ಮಹಿಳೆಯರು ಉನ್ನತ ಶಿಕ್ಷಣಕ್ಕೆ ದೂರದ ಪ್ರದೇಶಗಳಿಗೆ ತೆರಳುವುದು ಅಪರೂಪವಾಗಿದ್ದ ಜಿಲ್ಲೆಯಲ್ಲಿ 46 ವರ್ಷದ ಹಿಂದೆ ವಿ.ವಿ ಸ್ಥಾಪನೆಯಿಂದ ಅವರಿಗೆ ಉನ್ನತ ಮಟ್ಟದ ಶಿಕ್ಷಣ ದೊರಕಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಯಿತು ಎಂದು ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ 1,191 ಸಂಶೋಧನಾ ಪ್ರಬಂಧಗಳು ಹಾಗೂ 15 ಪೇಟೆಂಟ್ಗಳಿವೆ. 24 ವಿವಿಧ ಪೀಠಗಳು ಕಾರ್ಯಾಚರಿಸುತ್ತಿದೆ. 154 ಕಾಲೇಜುಗಳು ಹಾಗೂ 42 ಸ್ನಾತಕೋತ್ತರ ವಿಭಾಗಗಳಿವೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸಂಸ್ಥಾಪನಾ ದಿನ ಪ್ರಯುಕ್ತ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಕಳುಹಿಸಿದ ಸಂದೇಶವನ್ನು ಸಮಾರಂಭದಲ್ಲಿ ಕುಲಪತಿಗಳು ವಾಚಿಸಿದರು.
ಸಮಾರಂಭದಲ್ಲಿ ಕುಲಸಚಿವ (ಮೌಲ್ಯಮಾಪನ) ಪ್ರೊ. ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಉಪಸ್ಥಿತರಿದ್ದರು. ವಿಶ್ವವಿದ್ಯಾನಿಲಯದ ಕುಲಸಚಿವ ರಾಜು ಮೊಗವೀರ ಸ್ವಾಗತಿಸಿ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಗಣೇಶ್ ಸಂಜೀವ್ ವಂದಿಸಿದರು. ಧನಂಜಯ ಕುಂಬ್ಳೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಕೇಂದ್ರ ಅಭಿವೃದ್ಧಿ ಪಡಿಸಿದ ಆನ್ಲೈನ್ ತಂತ್ರಾಂಶಗಳನ್ನು ಉದ್ಘಾಟಿಸಲಾಯಿತು.


