ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. ಮಹಿಳೆಯರು ಆರ್ಥಿಕವಾಗಿ ಸದೃಢವಾದರೆ ದೇಶದ ಪ್ರಗತಿಗೆ ಪೂರಕವಾಗುತ್ತದೆ. ಹೊಲಿಗೆ ಯಂತ್ರ ಪಡೆದ ನಮ್ಮೆಲ್ಲ ಸಹೋದರಿಯರು ಸದುಪಯೋಗ ಮಾಡಿಕೊಳ್ಳಬೇಕು. ಈ ಮೂಲಕ ತಮ್ಮ ಜೀವನ ಮಟ್ಟವನ್ನು ಸುಧಾರಿಸಿ, ಕುಟುಂಬ ನಿರ್ವಹಣೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾದರೆ ಅದಕ್ಕಿಂತ ಖುಷಿಯ ಸಂಗತಿ ಇನ್ನೊಂದಿಲ್ಲ. ನಿಮ್ಮೆಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.


