ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಮತ್ತು ಪುನರ್ವಸತಿ ಕೇಂದ್ರ ಬಜಾಲ್, ಮಂಗಳೂರು ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು ಪರಿಗಣಿತ ವಿಶ್ವ ವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜೈಬುನ್ನಿಸಾ ಮಾತನಾಡಿ, ಮಾದಕ ವಸ್ತು ಮಾರಾಟ ಮತ್ತು ಅಕ್ರಮ ಸಾಗಾಣಿಕೆ ಜಾಗತಿಕವಾಗಿ ಪಸರಿಸಿದೆ. ಯುವಜನಾಂಗ ಬಲಿಪಶು ಆಗುತ್ತಿದ್ದಾರೆ.ಕ್ಷಣಿಕ ಸುಖಕ್ಕಾಗಿ ಮಾನಸಿಕ ಒತ್ತಡ ನಿವಾರಣೆಗಾಗಿ ಸಹಪಾಠಿಗಳ ಸಹವಾಸದೊಂದಿಗೆ, ಪ್ರಾಯೋಗಿತವಾಗಿ ಬಳಸುವುದು ಸರ್ವೆ ಸಾಮಾನ್ಯವಾಗಿದೆ. ಯುವ ಜನತೆ ಜಾಗೃತಿಗೊಂಡು, ಮಾದಕ ವ್ಯಸನವನ್ನು ವಿರೋಧಿಸುವ ಮೂಲಕ ಅಪರಾಧವನ್ನು ತಡೆಗಟ್ಟಬೇಕು. ಮಾದಕ ವ್ಯಸನ ಮುಕ್ತ ಬಲಿಷ್ಠ ರಾಷ್ಟ್ರವನ್ನು ನಿರ್ಮಿಸುವಲ್ಲಿ ಎಲ್ಲರೂ ಕೈ ಜೋಡಿಸೋಣ ಎಂದರು.
ಸರಕಾರಿ ಲೇಡಿಗೋಶನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ದುರ್ಗಾಪ್ರಸಾದ್ , ಬಜಾಲ್ ಲಿಂಕ್ ವ್ಯಸನ ಮುಕ್ತ ಪುನರ್ವಸತಿ ಕೇಂದ್ರದ ಅಧ್ಯಕ್ಷ ಡಾ.ಸತೀಶ್ ರಾವ್, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಆರ್.ಎಂ.ಓ ಡಾ.ಜಗದೀಶ್, ಮನೋರೋಗ ತಜ್ಞ ಡಾ.ಪ್ರಜಕ್ತ ವಿ. ರಾವ್ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಉಪಕುಲಪತಿ (ಪ್ರಭಾರ) ಆಲ್ವಿನ್ ಡೇಸ ಅಧ್ಯಕ್ಷತೆಯನ್ನು ವಹಿಸಿದ್ದರು.


