ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಕಾಲೇಜು ವಾಮಂಜೂರು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ತಂಬಾಕು ರಹಿತ ದಿನಾಚರಣೆ -2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ನವೀನ್ಚಂದ್ರ ಕುಲಾಲ್ ನೆರವೇರಿಸಿ, ವಿಶ್ವದಾದ್ಯಂತ ತಡೆಗಟ್ಟಬಹುದಾದ ಖಾಯಿಲೆ ಮತ್ತು ಮರಣಗಳಿಗೆ ಕಾರಣವಾಗಿರುವ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶಗಳ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣವಾಗಿದ್ದು, ಪ್ರತಿ 6 ಸೆಕೆಂಡಿಗಳಿಗೊಮ್ಮೆ ಒಬ್ಬ ವ್ಯಕ್ತಿಯ ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ದೇಶದ 21.9% ಯುವಕ-ಯುವತಿಯರು ಧೂಮಪಾನ ಚಟಕ್ಕೆ ಬಲಿಯಾಗುತ್ತಿದ್ದಾರೆ, ಯುವಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧ ಸೆಕ್ಷನ್ 4, ಸೆಕ್ಷನ್ 5 ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹಿರಾತು, ಉತ್ತೇಜನ ಪ್ರಾಯೋಜಕತೆ ನಿಷೇಧ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳು ಸಿಗದಂತೆ ಎಚ್ಚರವಹಿಸುವಂತೆ ಸೂಚಿಸಿದರು ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ತಂಬಾಕು ಸೇವೆನೆ ಚಟ ನಿಲ್ಲಿಸುವ ಬಗ್ಗೆ ಆಪ್ತಸಮಾಲೋಚನೆ ಹಾಗೂ ಚಿಕಿತ್ಸೆಯನ್ನು ನೀಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಕಾಲೇಜಿನ ಪ್ರಾಂಶುಪಾಲ ನರೇಂದ್ರ ಮಾತನಾಡುತ್ತಾ ವಿದ್ಯಾರ್ಥಿಗಳು ದಾರಿ ತಪ್ಪುವುದು ಸಹಜ. ದುಶ್ಚಟಗಳಿಂದ ದೂರವಿದ್ದು, ಹುಟ್ಟಿದ ಮನೆ, ಬೆಳೆದ ಕುಟುಂಬ, ಬೆಳೆದು ಬಂದಿರುವ ಸಮಾಜ, ಪಡೆದಿರುವ ಶಿಕ್ಷಣದ ಮೂಲಕ ಉತ್ತಮವಾದ ಸಮಾಜಮುಖಿ ಪ್ರಜೆಗಳಾಗಿ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಮಾತನಾಡುತ್ತಾ, ತಂಬಾಕು ಉತ್ಪನ್ನಗಳು ಮಾರುಕಟ್ಟೆಯಲ್ಲಿ ಆಕರ್ಷಿಕ ಉತ್ಪನ್ನಗಳಾಗಿ ಲಭ್ಯವಿದ್ದು, ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ಕರಾಳವಾದ ಉದ್ದೇಶಗಳನ್ನು ಹೊಂದಿರುವ ಹಿನ್ನಲೆಯಲ್ಲಿ ಯುವಜನತೆ ಈ ಬಗ್ಗೆ ಯೋಚಿಸದೇ ಮೋಜಿ ವಸ್ತುಗಳಿಗೆ ಒಳಗಾಗುತ್ತಿದ್ದಾರೆ. ಆಕರ್ಷಕ ತಂಬಾಕು ಉತ್ಪನ್ನಗಳ ಕರಾಳ ಉದ್ದೇಶಗಳ ಕುರಿತು ಜಾಗೃತಿಯನ್ನು ಮೂಡಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆಯನ್ನು ನಡೆಸಲಾಗಿದ್ದು, ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮ ಸಂಯೋಜಕ ಪುಂಡಲೀಕ ಲಕಾಟಿ ಹಾಜರಿದ್ದರು. ಶರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಾಕರ್ತೆ ಶುೃತಿ ತಂಬಾಕು ನಿಯಂತ್ರಣ ಜಾಗೃತಿ ಅಂಗವಾಗಿ ಪ್ರಮಾಣ ವಚನವನ್ನು ಬೋಧಿಸಿದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ತಂಬಾಕು ನಿಯಂತ್ರಣ ಘಟಕ ಆಪ್ತ ಸಮಾಲೋಚಕ ವಿಜಯ್ ಕುಮಾರ್ ವಂದಿಸಿದರು.
