ಮಂಗಳೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭೆ ಸ್ಪೀಕರ್ ಯು ಟಿ ಖಾದರ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಹಲವಾರು ದೇಶಗಳನ್ನು ಸುತ್ತಿ ಸಂವಿಧಾನವನ್ನು ಅಧ್ಯಯನ ಮಾಡಿ, ನಮ್ಮ ದೇಶಕ್ಕೆ ಬೃಹತ್ ಮತ್ತು ಲಿಖಿತ ಸಂವಿಧಾನವನ್ನು ರಚಿಸಿಕೊಟ್ಟು, ಕೆಳ ವರ್ಗದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಸಮಾನತೆಯ ಹಕ್ಕು ಸಿಗಬೇಕು ಎಂದು ಹೋರಾಟ ನಡೆಸಿ ಯಶಸ್ಸನ್ನು ಕಂಡವರಾಗಿದ್ದಾರೆ. ನಮ್ಮ ದೇಶಕ್ಕೆ ಬೇಕಾಗುವ ರೀತಿಯಲ್ಲಿ ಸಂವಿಧಾನವನ್ನು ರಚಿಸುವಲ್ಲಿ ಶ್ರಮವಹಿಸಿದ್ದಾರೆ ಎಂದರು.
ಲೋಕಸಭೆ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಾಬಾ ಸಾಹೇಬರ ಜೀವನವನ್ನು ಓದಿಕೊಂಡು, ಅರ್ಥೈಸಿಕೊಂಡು, ಅವರ ಮೌಲ್ಯ, ತತ್ವಗಳ,ಆದರ್ಶಗಳ ಆಧಾರದಲ್ಲಿ ಬದುಕಬೇಕು ಎಂದರು .
ಉಪನ್ಯಾಸ ನೀಡಿದ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಮಾತನಾಡಿ, ಕೆಳ ವರ್ಗದಲ್ಲಿ ಹುಟ್ಟಿದ ಅವರು ಬಾಲ್ಯದಲ್ಲಿಯೇ ಎಲ್ಲಾ ನೋವನ್ನು ಅನುಭವಿಸಿದ್ದಾರೆ. ಆದ್ದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಧಾರ್ಮಿಕವಾಗಿ ಮಾತನಾಡುವ ಶಕ್ತಿ ಅವರಲ್ಲಿತ್ತು. ಬಾಲ್ಯದಲ್ಲಿ ಅಸ್ಪೃಶ್ಯತೆಯ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ಅವರು ಹೇಳಿದರು. ಎಲ್ಲ ರೀತಿಯ ನೋವನ್ನು ಅನುಭವಿಸಿದ್ದರಿಂದ ಭಾರತಕ್ಕೆ ಯಾವ ರೀತಿ ಕಾನೂನು ರಚಿಸಬೇಕು ಎಂದು ಅರ್ಥೈಸಿಕೊಂಡು ದೇಶಕ್ಕೆ ಸಂವಿಧಾನವನ್ನು ರಚಿಸಿದರು. ಎಲ್ಲಾ ವಿದ್ಯಾರ್ಥಿಗಳು ಅಂಬೇಡ್ಕರ್ ರವರ ಜೀವನವನ್ನು ಓದಬೇಕು. ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಮಾತನಾಡಿ ಡಾ. ಬಿಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ದೇಶದ ಕಾನೂನನ್ನು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ಅಧೀಕ್ಷಕ ಯತೀಶ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಮ್ ಸ್ಟಾನ್ಲಿ ಅಲ್ವಾರಿಸ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕೆ ಮತ್ತಿತರರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಡಾ ಬಿ ಎಸ್ ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.


