ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೋದಿ ಸರ್ಕಾರವು ಹನ್ನೆರಡು ವರ್ಷಗಳ ಕಾಲ ನಿರಂತರ ಹಾಗೂ ಕಳಂಕ ರಹಿತ ಜನಪರ ಆಡಳಿತ ನೀಡಿ ವಿಕಸಿತ ಭಾರತದ ಸಂಕಲ್ಪದೊಂದಿಗೆ ದಾಪುಗಾಲಿಡುತ್ತಿದೆ. ಅವರಿಗೆ ದೇಶದ ಸಮಸ್ತ ಜನತೆಯ ಆಶೀರ್ವಾದ ಸದಾ ಕಾಲ ಇರಲಿದೆ ಎಂದರು. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ, ಮಾನ್ಯ ಪ್ರಧಾನಿಗಳ ಯಶಸ್ವಿ ಆಡಳಿತದ 12ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಇದೇ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ರಾಧಾ ಮೋಹನ್ ಅಗರ್ವಾಲ್ ಅವರು ಆಗಮಿಸಲಿದ್ದು ಮಾರ್ಗನ್ ಗೇಟ್ ನ ಪಾಲೆಮಾರ್ ಗಾರ್ಡನ್ ನಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರಾಜ್ ಗೋಪಾಲ್ ರೈ, ನಿಕಟಪೂರ್ವ ಪಾಲಿಕೆ ಸದಸ್ಯರುಗಳು ಸೇರಿದಂತೆ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


