ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭವು ಸೋಮವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.
ಸಮಾರಂಭ ಉದ್ಘಾಟಿಸಿ ಮಾತಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು, “ ಗ್ರಾಹಕ ಸ್ನೇಹಿಯಾಗಿರುವ ಎಸ್ ಸಿಡಿಸಿಸಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆ. ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಹಿಳೆಯರ ಜೀವನದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿ ಅವರಿಗೆ ಸ್ವಾವಲ೦ಬನೆಯ ಬದುಕು ಕಟ್ಟಿಕೊಡುತ್ತಿರುವ ಕಾಯ೯ ಮಾಡುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್.ರಾಜೇಂದ್ರ ಕುಮಾರ್ ಅವರು ಮಾಗತಾಡಿ , ನವೋದಯ ಸ್ವಸಹಾಯ ಸಂಘದಲ್ಲಿ ಇಂದು ಸುಮಾರು 5 ಲಕ್ಷ ಮಹಿಳೆಯರು ಸದಸ್ಯರಿದ್ದು ಎಂಟು ಜಿಲ್ಲೆಗಳಲ್ಲಿ ವಿಸ್ತರಣೆಗೊಂಡಿದೆ. ಸದಸ್ಯರೆಲ್ಲಾ ಸಮಾನರು ಎ೦ಬ ನಿಟ್ಟಿನಲ್ಲಿ ಸಮವಸ್ತ್ರ ನೀಡಲಾಗುತ್ತಿದೆ. ಮೇ ತಿಂಗಳಲ್ಲಿ ಸಂಘಕ್ಕೆ 25 ವರ್ಷ ತುಂಬುತ್ತಿದ್ದು ಮಂಗಳೂರಿನ ನೆಹರೂ ಮೈದಾನದಲ್ಲಿ ರಜತ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಸದಸ್ಯೆಯರು ಒಂದೇ ಸಮವಸ್ತ್ರದಲ್ಲಿ ಪಾಲ್ಗೊಳ್ಳುವ ಮೂಲಕ ದೇಶಕ್ಕೆ ಮಾದರಿಯಾಗಬೇಕು ಎಂದರು.
ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಡಾ| ಎಂ. ಎನ್.ರಾಜೇಂದ್ರ ಕುಮಾರ್ ಅವರು ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು ಆ ಮೂಲಕ ಸಮಾಜ ಸದೃಢವಾಗಬೇಕು ಎಂಬ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ , “ಮಹಿಳೆ ಆರ್ಥಿಕವಾಗಿ ಸಬಲೀಕರಣಗೊಂಡರೆ ಇಡೀ ದೇಶ ಅಭಿವೃದ್ಧಿಯಾದಂತೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಎಸ್ ಸಿಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿದ ಬಳಿಕ ಇಡೀ ದೇಶಕ್ಕೆ ಮಾದರಿಯಾಗಿ ಬ್ಯಾಂಕ್ ಕೆಲಸ ಮಾಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ, ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿದೆ೯ಶಕರಾದ ದೇವಿಪ್ರಸಾದ್ ಶೆಟ್ಟಿ, ಟಿ.ಜಿ.ರಾಜರಾಮ ಭಟ್, ಶಶಿಕುಮಾರ್ ರೈ ಬೊಳ್ಯೊಟ್ಟು, ಭಾಸ್ಕರ್ ಕೋಟ್ಯಾನ್ , ಸಿಇಓ ಗೋಪಿನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ನಿತೀಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
