ಮ೦ಗಳೂರು: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, , ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಲಾಯಿತು. ಈ ಪರಿಶೀಲನೆಯಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಪ್ರಧಾನ ವ್ಯವಸ್ಥಾಪಕರು ಸಕಲೇಶಪುರ ಘಾಟ್ ಸೆಕ್ಷನ್ನ ವಿದ್ಯುತ್ತಿಕರಣ ಕಾರ್ಯಗಳನ್ನೂ ಪರಿಶೀಲಿಸಿದರು, ಹೊಸದಾಗಿ ವಿದ್ಯುದೀಕೃತಗೊಳ್ಳುತ್ತಿರುವ ಭಾಗದ ಸಿದ್ಧತೆ ಹಾಗೂ ಭದ್ರತಾ ಮಾನದಂಡಗಳನ್ನು ಪರಿಶೀಲಿಸಲಾಯಿತು. ಜೊತೆಗೆ, ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನ ನಡುವಿನ ವಿಭಾಗದಲ್ಲಿ ವಿಂಡೋ–ಟ್ರೈಯಾಂಗಲ್ ಪರಿಶೀಲನೆ ನಡೆಸಲಾಗಿದ್ದು, ರೈಲ್ವೆ ಹಳಿಗಳ ಸ್ಥಿತಿ, ಸಿಗ್ನಲ್ ವ್ಯವಸ್ಥೆಗಳು ಹಾಗೂ ಸುರಕ್ಷತೆ ಮತ್ತು ಸುಗಮ ರೈಲು ಸಂಚಾರಕ್ಕೆ ಅಗತ್ಯವಿರುವ ಇತರೆ ಕಾರ್ಯಾಚರಣಾ ಅಂಶಗಳ ಮೌಲ್ಯಮಾಪನ ಮಾಡಲಾಯಿತು.
ಭೇಟಿಯ ಸಂದರ್ಭದಲ್ಲಿ, ಮುಕುಲ್ ಸರನ್ ಮಾಥುರ್ ಮತ್ತು ಮುದಿತ್ ಮಿತ್ತಲ್ ಅವರು ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಲ್ಲಿ ಪ್ರಯಾಣಿಕರೊಂದಿಗೆ ಸಂವಹನ ನಡೆಸಿ, ರೈಲ್ವೆ ಸೌಲಭ್ಯಗಳು, ಸೇವೆಗಳು ಮತ್ತು ಪ್ರಯಾಣ ಅನುಭವದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿ ಪ್ರಯಾಣಿಕರಿಂದ ದೊರೆತ ಸಲಹೆಗಳನ್ನು ದಾಖಲಿಸಿಕೊಂಡು ತ್ವರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


