24.8 C
Karnataka
Thursday, April 30, 2026

ವ್ಯಸನ ಮುಕ್ತ ಸಮಾಜ ನಿರ್ಮಿಸಲು ಯುವಕರ ಸಹಕಾರ ಅಗತ್ಯ”

ಮಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಯುವಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವ್ಯಸನಗಳಿಗೆ ಆಕರ್ಷಣೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಸನ ಮುಕ್ತ ದಿನದ ಆಚರಣೆಯು ಯುವಜನರಲ್ಲಿ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶಿನಿ ನಿಲಯ(ಸ್ವಾಯತ್ತ) ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ರೋಶಿನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಸಭಾಂಗಣದಲ್ಲಿ ಶನಿವಾರ ನಡೆದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಪ ಪೊಲೀಸ್ ಆಯುಕ್ತ ಮಿಥುನ್ ಹೆಚ್.ಎನ್ ಮಾತನಾಡಿ, ಮಾದಕ ವ್ಯಸನ ಮಾರಾಟಗಾರರು ವಿದ್ಯಾರ್ಥಿಗಳ ಮೇಲೆ ಗುರಿ ಇಡುತ್ತಾರೆ. ವ್ಯಸನ ಮುಕ್ತ ಸಮಾಜ ನಿರ್ಮಿಸಲು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಡ್ರಗ್ಸ್ ವಿತರಣೆ ಜಾಲಗಳನ್ನು ಮಟ್ಟ ಹಾಕಲು ವಿದ್ಯಾರ್ಥಿಗಳ ಸಹಕಾರವು ಅಗತ್ಯವಿದೆ. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೊಳಗಾಗಿದ್ದರೆ ದುಶ್ಚಟಗಳಿಗೆ ಒಳಗಾಗದೆ, ವೈದ್ಯರ ಸಲಹೆಯನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಪ್ರತಿಯೊಂದು ಶಾಲಾ ಕಾಲೇಜುಗಳ ಆವರಣದಲ್ಲಿ ಕ್ಯೂ ಆರ್ ಕೋಡ್ ಅಳವಡಿಸಲಾಗಿದ್ದು, ಯಾರಾದರೂ ವ್ಯಸನಗಳಲ್ಲಿ ತೊಡಗಿಸಿಕೊಂಡವರನ್ನು ಜಾಲದಿಂದ ಹೊರ ತರಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ನೀಡಬಹುದು ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞೆ ಡಾ. ಪ್ರಜಕ್ತಾ ರಾವ್ ಮಾತನಾಡಿ, ಗಾಂಜಾ, ಕೊಕೇನ್, ಹೆರಾಯಿನ್ ಮುಂತಾದ ಮಾದಕ ದ್ರವ್ಯಗಳ ಸೇವನೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಸಮಾಜದ ಮೇಲೆಯೂ ಕೆಟ್ಟ ಪ್ರಭಾವ ಬೀರುತ್ತದೆ. ಇಂತಹ ವ್ಯಸನಗಳಿಗೆ ಒಳಗಾಗುವುದರಿಂದ ಶಿಕ್ಷಣ, ಉದ್ಯೋಗ ಹೀಗೆ ಸಾಮಾಜಿಕ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅವರ ಹೇಳಿದರು. ಮಾದಕ ವ್ಯಸನಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನರು ಕೈಜೋಡಿಸಬೇಕು ಎಂದು ಅವರು ತಿಳಿಸಿದರು.
ಪೋಲಿಸ್ ಉಪನಿರೀಕ್ಷಕ ಮಾರುತಿ ಪಿ. ಮಾತನಾಡಿ ಅಮಲು ಪದಾರ್ಥಗಳ ಸೇವನೆಯು ಕ್ಷಣಿಕ ಆನಂದವನ್ನು ನೀಡುತ್ತದೆ. ಆದರೆ ಬಗೆಹರಿಸಲಾಗದ ಸಮಸ್ಯೆಯನ್ನು ಉಂಟುಮಾಡುತ್ತದೆ. ಯುವಜನತೆ ಮತ್ತು ವಿದ್ಯಾರ್ಥಿಗಳು ಈ ವಿಷಯದಲ್ಲಿ ತಾವು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಪರೀಕ್ಷಾ ನಿಯಂತ್ರಕಿ ಫರೀದಾ ಗೋವಿಯಸ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ.ಉಳೆಪಾಡಿ ವಂದಿಸಿದರು. ವಿದ್ಯಾರ್ಥಿ ಸುಧನ್ವ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles